ನವದೆಹಲಿ, ಅ 14 (DaijiworldNews/HR): ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಕುರಿತ ತೀರ್ಪನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದು, ಅರ್ಜಿದಾರರ ಮನವಿಯನ್ನು ತಿರಸ್ಕರಿಸಲಾಗಿದೆ.
ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಇಂದು ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದ್ದು, ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆ ನಡೆಸಬೇಕೆಂಬ ಹಿಂದೂ ಪಕ್ಷದ ಬೇಡಿಕೆಯನ್ನು ವಾರಣಾಸಿ ನ್ಯಾಯಾಲಯ ತಿರಸ್ಕರಿಸಿದೆ.
ಇನ್ನು ಕಾರ್ಬನ್ ಡೇಟಿಂಗ್ ಎನ್ನುವುದು ಯಾವುದೇ ವಸ್ತುವಿನ ವಯಸ್ಸನ್ನು ನಿಖರವಾಗಿ ತಿಳಿದುಕೊಳ್ಳಲು ಪುರಾತತ್ತ್ವ ಶಾಸ್ತ್ರದಲ್ಲಿ ಬಳಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಜ್ಞಾನವಾಪಿ ಮಸೀದಿ ಸಮಿತಿಯು ಕಾರ್ಬನ್ ಡೇಟಿಂಗ್ ಮನವಿಯನ್ನು ಪುರಸ್ಕರಿಸಬಾರದೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿತ್ತು.