ಪಿಲಿಭಿತ್, ಅ 15 (DaijiworldNews/DB): ನೆಲದ ವಾಸ್ತವ ವಿಚಾರಗಳು ವೈಮಾನಿಕ ಸಮೀಕ್ಷೆಯಲ್ಲಿ ಕಾಣಿಸುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ಬಿಜೆಪಿ ಸಂಸದ ವರುಣ್ ಗಾಂಧಿ ಆಕ್ರೋಶ ಹೊರ ಹಾಕಿದ್ದಾರೆ.
ಪೂರ್ವಭಾವಿ ಅರ್ಹತಾ ಪರೀಕ್ಷೆಯನ್ನು (ಪಿಇಟಿ) ಮುಂದೂಡದಕ್ಕಾಗಿ, ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ವಿದ್ಯಾರ್ಥಿಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರವಾಗಿ ಟ್ವೀಟ್ ಮುಖಾಂತರ ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿಯವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರೆ ನೆಲದ ವಾಸ್ತವ ವಿಚಾರಗಳು ಅದರಲ್ಲಿ ಗೋಚರಿಸುವುದಿಲ್ಲ ಎಂದು ಕಿಡಿ ಕಾರಿದ್ದಾರೆ.
ಉತ್ತರ ಪ್ರದೇಶದಲ್ಲಿ ಸದ್ಯ ಪ್ರವಾಹ ಪರಿಸ್ಥಿತಿ ಇದೆ. ಆದರೆ ಇದರ ನಡುವೆಯೇ ಪಿಇಟಿ ಪರೀಕ್ಷೆಯನ್ನು ಆಯೋಜಿಸಿದ್ದು, 37 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಉತ್ತರ ಬರೆಯುವ ಸವಾಲಿಗಿಂತ ಪರೀಕ್ಷಾ ಕೇಂದ್ರವನ್ನು ತಲುಪುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದಿದ್ದಾರೆ.
ಪ್ರವಾಹ ಪರಿಸ್ಥಿತಿ ಇರುವುದರಿಂದ ಪರೀಕ್ಷೆಯನ್ನು ಮುಂದೂಡಬೇಕಾಗಿ ವಿದ್ಯಾರ್ಥಿಗಳು ನಿರಂತರವಾಗಿ ಬೇಡಿಕೆಯಿಟ್ಟಿದ್ದಾರೆ. ಆದರೂ ವಿದ್ಯಾರ್ಥಿಗಳ ಬೇಡಿಕೆಗೆ ಸರ್ಕಾರ ಸ್ಪಂದಿಸದೆ ನಿಗದಿತ ದಿನಾಂಕದಂದೇ ಪರೀಕ್ಷೆ ನಡೆಸಿದೆ. ಸಂಚಾರ ವ್ಯವಸ್ಥೆಯನ್ನೂ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಒದಗಿಸಿಕೊಟ್ಟಿಲ್ಲ ಎಂದವರು ಟ್ವೀಟ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.