ನವದೆಹಲಿ, ಅ 16 (DaijiworldNews/DB): ನಾಳೆ (ಅಕ್ಟೋಬರ್ 17) ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ರಾಹುಲ್ ಗಾಂಧಿಯವರು ಬಳ್ಳಾರಿಯಲ್ಲೇ ಮತದಾನ ಮಾಡಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಕಣದಲ್ಲಿದ್ದು, ಇಬ್ಬರ ನಡುವೆ ತೀವ್ರ ಪೈಪೋಟಿ ಇದೆ. ಇನ್ನು ಭಾರತ್ ಜೋಡೋ ಯಾತ್ರೆಯ ಕಾರಣಕ್ಕಾಗಿ ಕರ್ನಾಟಕದಲ್ಲಿರುವ ರಾಹುಲ್ ಗಾಂಧಿಯವರು ಎಲ್ಲಿ ಮತ ಚಲಾಯಿಸುತ್ತಾರೆ? ಮತ ಚಲಾಯಿಸುವುದಕ್ಕಾಗಿಯೇ ಅವರು ದೆಹಲಿಗೆ ಹೋಗುತ್ತಾರೆಯೇ ಎಂಬ ಪ್ರಶ್ನೆಗಳೆದ್ದಿದ್ದವು. ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಉಸ್ತುವಾರಿ ಜೈರಾಮ್ ರಮೇಶ್ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿಯವರು ಕರ್ನಾಟಕದ ಬಳ್ಳಾರಿಯ ಭಾರತ್ ಜೋಡೋ ಯಾತ್ರಾ ಶಿಬಿರದಲ್ಲಿ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪಿಸಿಸಿ ಪ್ರತಿನಿಧಿಗಳಾದ ಸುಮಾರು 40 ಭಾರತ ಯಾತ್ರಿಗಳೊಂದಿಗೆ ಬಳ್ಳಾರಿಯ ಸಂಗನಕಲ್ಲುನಲ್ಲಿರುವ ಭಾರತ್ ಜೋಡೋ ಯಾತ್ರಾ ಕ್ಯಾಂಪ್ ಸೈಟ್ನಲ್ಲಿ ರಾಹುಲ್ ಗಾಂಧಿಯವರು ಮತದಾನ ಮಾಡಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ನಾಳೆ ನಡೆಯುವ ಅಧ್ಯಕ್ಷೀಯ ಚುನಾವಣೆಗಾಗಿ ಎಲ್ಲಾ ರಾಜ್ಯಗಳಲ್ಲಿ 67 ಬೂತ್ಗಳನ್ನು ಸ್ಥಾಪಿಸಲಾಗಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರ ತಿಳಿಸಿದೆ. ಗುಪ್ತ ಮತದಾನದ ಮೂಲಕ ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಎಲ್ಲಾ ಬೂತ್ಗಳಲ್ಲಿ ಮತದಾನ ಮುಗಿದ ಬಳಿಕ ಬ್ಯಾಲೆಟ್ ಬಾಕ್ಸ್ ಗಳನ್ನು ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ತಂದು ಭದ್ರವಾಗಿಡಲಾಗುತ್ತದೆ. ಅಕ್ಟೋಬರ್ 19 ರಂದು ಮತ ಎಣಿಕೆ ನಡೆದು, ಫಲಿತಾಂಶ ಹೊರ ಬೀಳಲಿದೆ.