ಮೈಸೂರು, ಅ 20 (DaijiworldNews/HR): ಜನಪರ ಯೋಜನೆ ಚಾಚೂ ತಪ್ಪದೆ ಜಾರಿಗೊಳಿಸಲು 123 ಸೀಟ್ ಪಡೆಯುವುದು ನನ್ನ ಮುಂದಿನ ಗುರಿಯಾಗಿದೆ. ಮುಂದೆ ಮೈತ್ರಿ ಸರ್ಕಾರ ಬರಲಿದೆ ಎಂಬ ನಿಲುವು ಎಲ್ಲಾ ಪಕ್ಷದವರಲ್ಲಿದೆ ಆದರೆ ಜೆಡಿಎಸ್ ಪೂರ್ಣ ಪ್ರಮಾಣದ ಸರ್ಕಾರ ರಚಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ ಎಂದರು.
ಇನ್ನು ಉಚಿತವಾದ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು, ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನು ಸ್ವೀಕರಿಸಿದ್ದೇನೆ. ಜನರು ಉತ್ತಮ ಬದುಕು ಕಟ್ಟಿಕೊಡುತ್ತೇನೆ ಎಂದು ಹೇಳಿದ್ದಾರೆ.