ಬಾರಾಮತಿ, ಅ 23 (DaijiworldNews/DB): ಮಹಾರಾಷ್ಟ್ರಕ್ಕೆ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದಾಗ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಭಾನುವಾರ ಈ ಕುರಿತು ಮಾತನಾಡಿದ ಅವರು, ನವೆಂಬರ್ 7ರಂದು ಭಾರತ್ ಜೋಡೋ ಯಾತ್ರೆಯು ರಾಜ್ಯಕ್ಕೆ ಪ್ರವೇಶಿಸಲಿದ್ದು, ಈ ವೇಳೆ ನಡೆಯುವ ಸಾಮೂಹಿಕ ಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಾದ ಅಶೋಕ್ ಚವ್ಹಾಣ್ ಮತ್ತು ಬಾಳಾಸಾಹೇಬ್ ಥೋರಟ್ ಅವರು ತನ್ನನ್ನು ಭೇಟಿಯಾಗಿ ಆಹ್ವಾನಿಸಿದ್ದಾರೆ ಎಂದರು.
ಭಾರತ್ ಜೋಡೋ ಯಾತ್ರೆ ಮೂಲಕ ಸಮಾಜದಲ್ಲಿ ಸೌಹಾರ್ದ ಬಿತ್ತುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಹೀಗಾಗಿ ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲೆಲ್ಲ ನಮ್ಮ ಪಕ್ಷದ ಕೆಲವು ಮಂದಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಇದೇ ವೇಳೆ ತಿಳಿಸಿದರು.
ಬಿಸಿಸಿಐಯ 36ನೇ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕಗೊಂಡಿರುವ ಕುರಿತು ವ್ಯಂಗ್ಯವಾಡಿದ ಅವರು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚುನಾವಣೆಯ ಮೇಲೆ ರಾಜಕೀಯ ಮಾಡುತ್ತಿದೆ ಎಂದರು.
ಎಲ್ಲಾ ಕ್ಷೇತ್ರಗಳಲ್ಲಿ ರಾಜಕೀಯ ಮಾಡುವವರು ಅಜ್ಞಾನಿಗಳು. ಆಟಗಾರರಿಗೆ ಸೌಲಭ್ಯ ಕಲ್ಪಿಸಿಕೊಡುವುದಷ್ಟೇ ಬಿಸಿಸಿಐ ಕೆಲಸವಾಗಬೇಕು ಎಂದರು.