ಚೆನ್ನೈ, ಅ 26 (DaijiworldNews/DB): ಕೊಯಮತ್ತೂರು ಕಾರು ಸ್ಪೋಟ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಮಿಳುನಾಡು ಸರ್ಕಾರ ಹೇಳಿದೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಧ್ಯಕ್ಷತೆಯಲ್ಲಿ ಸೆಕ್ರೆಟರಿಯೇಟ್ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಬುಧವಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು. ಪ್ರಕರಣದಲ್ಲಿ ವಿದೇಶಿ ಸಂಪರ್ಕಗಳ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂದು ಚರ್ಚಿಸಲಾಯಿತು. ಬಳಿಕ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ದೀಪಾವಳಿಗೂ ಮುನ್ನಾ ದಿನ ಕೊಯಮತ್ತೂರಿನಲ್ಲಿ ಕಾರ್ ಸ್ಪೋಟ ನಡೆದು ಕಾರಿನಲ್ಲಿದ್ದ ಜಮೇಜಾ ಮುಬಿನ್ (25) ಮೃತಪಟ್ಟಿದ್ದ. ಆತನ ಹಿನ್ನೆಲೆ ಪರಿಶೀಲಿಸಿದಾಗ ಭಯೋತ್ಪಾದಕರ ಸಂಪರ್ಕ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಸಿ ಪೊಲೀಸರು ಐವರನ್ನು ಬಂಧಿಸಿದ್ದರು. ಅಲ್ಲದೇ ಮೃತ ಮುಬಿನ್ ಮನೆ ಮೇಲೆ ದಾಳಿ ನಡೆಸಿದಾಗ ಹಲವಾರು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಯಿತು. ಬಂಧಿಸಲ್ಪಟ್ಟ ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.