ಕೇರಳ, ಅ 28 (DaijiworldNews/DB): ಸರಗಳ್ಳರನ್ನು ಬೆನ್ನಟ್ಟಿ ಹೋದ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾಗರ ಹಾವು ಕಚ್ಚಿ ಗಾಯಗೊಳಿಸಿದ ಘಟನೆ ಕಣ್ಣೂರು ಜಿಲ್ಲೆಯ ಮಟ್ಟನೂರು ಪಟ್ಟಣದಲ್ಲಿ ನಡೆದಿದೆ.
ಗುರುವಾರ ರಾತ್ರಿ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಳೆದು ಪರಾರಿಯಾಗಿದ್ದಾರೆ. ಈ ವೇಳೆ ಮಹಿಳೆ ಬೊಬ್ಬೆ ಹೊಡೆದಿದ್ದು, ಸ್ಥಳೀಯರು ಸೇರಿ ಸನಿಹದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಳ್ಳರ ಪತ್ತೆಗೆ ಹೊರಟ ಪೊಲೀಸರು ಆ ರಸ್ತೆಯಾಗಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.
ಈ ವೇಳೆ ಅದೇ ಮಾರ್ಗದಲ್ಲಿ ಬಂದ ಕಳ್ಳರು ಪೊಲೀಸರನ್ನು ಕಂಡು ಕತ್ತಲಲ್ಲೇ ಓಟ ಕಿತ್ತಿದ್ದಾರೆ. ಕಳ್ಳರು ಓಡುತ್ತಿರುವುದನ್ನು ಗಮನಿಸಿದ ಪೊಲೀಸ್ ಅಧಿಕಾರಿ ಕೂಡಲೇ ಅವರನ್ನು ಬೆನ್ನಟ್ಟಿದ್ದಾರೆ. ಕಳ್ಳರನ್ನು ಹಿಡಿಯಲು ಅವರ ಹಿಂದೆ ಕತ್ತಲಲ್ಲೇ ಓಡುತ್ತಿದ್ದಾಗ ಅಲ್ಲೇ ನಾಗರ ಹಾವೊಂದು ಇರುವುದು ಪೊಲೀಸ್ ಅಧಿಕಾರಿಯ ಗಮನಕ್ಕೆ ಬಂದಿರಲಿಲ್ಲ. ಹಾವು ಅವರ ಕಾಲನ್ನು ಕಚ್ಚಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಸದ್ಯ ಪೊಲೀಸ್ ಅಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಕಳ್ಳರು ತಪ್ಪಿಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.