ಬೆಂಗಳೂರು, ಅ 28 (DaijiworldNews/DB): ಕರ್ನಾಟಕ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆಯಲಿದೆ. ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ದಿ. ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು. ಕಾರ್ಯಕ್ರಮಕ್ಕೆ ರಜನೀಕಾಂತ್, ಜ್ಯೂನಿಯರ್ ಎನ್ಟಿಆರ್ ಅವರನ್ನೂ ಆಹ್ವಾನಿಸಲಾಗಿದ್ದು, ಭಾಗಿಯಾಗಲಿದ್ದಾರೆ. ಇದರೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್ಕುಮಾರ್ ಕುಟುಂಬದವರು ಭಾಗವಹಿಸಲಿದ್ದಾರೆ ಎಂದರು.
ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಯಾಗಿದ್ದು, ನಾಡಿನಾದ್ಯಂತ ಕನ್ನಡದ ಬಾವುಟ ರಾರಾಜಿಸುತ್ತಿದೆ. ರಾಜ್ಯ ಮಾತ್ರವಲ್ಲದೆ ಇತರೆಡೆಗಳಲ್ಲಿಯೂ ಆರು ಹಾಡುಗಳನ್ನು ಹಾಡುವ ಮೂಲಕ ಕೋಟಿ ಕಂಠ ಗಾಯನಕ್ಕೆ ಪುಷ್ಠಿ ನೀಡಿದ್ದಾರೆ ಎಂದವರು ತಿಳಿಸಿದರು.