ಶಿವಮೊಗ್ಗ, ಅ 29 (DaijiowrldNews/HR): ನಳಿನ್ ಕುಮಾರ್ ಕಟೀಲ್ ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ಎಂದರು.
ಇನ್ನು ಭಾರತ ಐಕ್ಯತಾ ಯಾತ್ರೆಯ ಉದ್ದೇಶ ದ್ವೇಷ ರಾಜಕಾರಣದಿಂದ ಒಡೆದು ಹೋಗಿರುವ ಮನಸುಗಳನ್ನು ಒಂದುಗೂಡಿಸುವುದು, ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರ ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಆದರೆ ಬಿಜೆಪಿಯವರು ರಾಹುಲ್ ಗಾಂಧಿ ಅವರ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಯಾತ್ರೆಯ ಬಗ್ಗೆ ತಪ್ಪು ಮಾಹಿತಿ ನೀಡಲು ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಗಲಾಟೆ ಮಾಡಿಸುವುದು ಈಶ್ವರಪ್ಪನವರು. ಜನರನ್ನು ಎತ್ತಿಕಟ್ಟಿ ಜಗಳ ಮಾಡುವಂತೆ ಮಾಡುವುದು ಅವರೆ. ಹರ್ಷ ಕೊಲೆಯಾದಾಗ ಆತನ ಹೆಣ ಇಟ್ಟುಕೊಂಡು ಮೆರವಣಿಗೆ ಮಾಡಿದರು, ಆಗ 144 ಸೆಕ್ಷನ್ ಇತ್ತು. ಸರ್ಕಾರವೂ ಇವರದೇ ಇದೆ ಆದರೂ ಒಬ್ಬ ಮಂತ್ರಿಯಾಗಿ ಈ ರೀತಿ ಮೆರವಣಿಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.