ಜಮ್ಮು ಮತ್ತು ಕಾಶ್ಮೀರ, ಅ 30 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ರಾಟಲ್ ಜಲವಿದ್ಯುತ್ ಯೋಜನೆ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಆರು ಮಂದಿ ಗಾಯಗೊಂಡಿದ್ದಾರೆ.
ಶನಿವಾರದಂದು ಇಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಜೆಸಿಬಿ ಚಾಲಕ ಮೃತಪಟ್ಟು, ಹಲವರು ಅವಶೇಷಗಳಡಿ ಸಿಲುಕಿದ್ದರು. ಇದೀಗ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಅವಶೇಷಗಳಡಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಘಟನೆಯಲ್ಲಿ ಗಾಯಾಳುಗಳಾಗಿದ್ದ ಆರು ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನ ಡೆಪ್ಯುಟಿ ಕಮಿಷನರ್ ದೇವಾಂಶ್ ಯಾದವ್ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಕಿಸ್ತ್ವಾರ್ ಜಿಲ್ಲೆಯ ಚೆನಾಬ್ ನದಿಯ ಮೇಲೆ ಪ್ರಸ್ತಾಪಿಸಲಾದ ಜಲ ವಿದ್ಯತ್ ಯೋಜನೆ ಇದಾಗಿದೆ.