ತುಮಕೂರು, ನ 01(DaijiworldNews/MS): ರಾಜ್ಯ ಪೊಲೀಸ್ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಹೇಳಿದ್ದಾರೆ.
ತುಮಕೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿ, 'ಪೊಲೀಸರ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಮಾಡುವಂತೆ ಸಾಕಷ್ಟು ಒತ್ತಡಗಳು ಬರುತ್ತಿವೆ. ಪೊಲೀಸ್ ಇಲಾಖೆಯಲ್ಲಿ ಯುವ ಶಕ್ತಿ ಇರಬೇಕು ಎಂಬುದು ನನ್ನ ವಿಚಾರ. ಆದರೆ ಒತ್ತಡಗಳು ಹೆಚ್ಚಾಗುತ್ತಿವೆ' ಎಂದಿದ್ದಾರೆ
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಇರಬೇಕು ಆದರೆ ಒತ್ತಡಗಳು ಬಂದ ಕಾರಣಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಒಂದು ತಿಂಗಳು ಕಾಲ ಮುಂದೂಡಲಾಗಿದೆ. ಎರಡು ವರ್ಷ ಸಡಿಲಿಕೆ ಮಾಡುವ ಆಲೋಚನೆ ಇದೆ. ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಎರಡು ವರ್ಷ ಕೋವಿಡ್ ಕಾರಣದಿಂದ ಪೊಲೀಸ್ ಕಾನ್ಸ್ಸ್ಟೇಬಲ್ ನೇಮಕಾತಿ ವಿಳಂಬ ಆಗಿದೆ. ಈ ನಿಟ್ಟಿನಲ್ಲಿ ವಯೋಮಿತಿ ಏರಿಕೆಗೆ ಅಭ್ಯರ್ಥಿಗಳು ಸಾಕಷ್ಟು ಮನವಿ ಮಾಡುತ್ತಿದ್ದಾರೆ.