ತುಮಕೂರು, ನ 04 (DaijiworldNews/MS): ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಅವಳಿ ಮಕ್ಕಳು ಅಸುನೀಗಿದ ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಭಾರತಿ ನಗರದಲ್ಲಿ ವಾಸವಾಗಿದ್ದ ತಮಿಳುನಾಡು ಮೂಲದ, ಕಡುಬಡತನದಲ್ಲಿಕಸ್ತೂರಿ ಎಂಬಾಕೆ ಪ್ರಸವ ಬೇನೆಯಿಂದ ನೆರಮನೆಯ ಅಜ್ಜಿ ಜೊತೆ ಆಟೋದಲ್ಲಿ ಜಿಲ್ಲಾಸ್ಪತ್ರೆಗೆ ತಡರಾತ್ರಿ ಬಂದಾಗ , ಆಧಾರ್ ಕಾರ್ಡ್, ತಾಯಿ ಕಾಡ್ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಚಿಕಿತ್ಸೆ ನೀಡದೇ ಆಕೆಯನ್ನು ವಾಪಸ್ ಕಳುಹಿಸಿದ್ದಾರೆ. ಮನೆಗೆ ಬಂದ ಬಳಿಕ ನೋವು ವಿಪರೀತವಾಗಿ ಹೆರಿಗೆಯಾಗಿದ್ದು, ವಿಪರೀತ ರಕ್ತಸ್ರಾವವಾಗಿ ತಾಯಿ, ಅವಳಿ ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ತುಮಕೂರು ಜಿಲ್ಲಾ ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ. ಉಷಾ ಎ.ಆರ್ ಹಾಗೂ ಶುಶ್ರೂಷಾಧಿರಿಕಾರಿಗಳಾದ ಯಶೋಧ ಬಿ.ವೈ. , ಸವಿತ, ದಿವ್ಯ ಭಾರತಿ ಎಂಬುವರ ವಿರುದ್ಧ ಕರ್ತವ್ಯ ಲೋಪ ಹಾಗೂ ದುರ್ನಡತೆ ತೋರಿಸಿರುವುದರಿಂದ, ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ, ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್ ಆದೇಶ ಹೊರಡಿಸಿದ್ದಾರೆ.
ಇನ್ನುಜಿಲ್ಲಾ ಆಸ್ಪತ್ರೆಗೆ ಗುರುವಾರ ರಾತ್ರಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಗರ್ಭಿಣಿ ಸೇರಿದಂತೆ ಯಾವೊಬ್ಬ ರೋಗಿಯ ದಾಖಲೆ, ಗುರುತಿನ ಕಾರ್ಡ್ ಪರಿಶೀಲಿಸದೆ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ವೈದ್ಯರು, ಸಿಬ್ಬಂದಿಯನ್ನು ವಜಾ ಮಾಡಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಅದಕ್ಕೆ ಸಂಬಂಧಿಸಿದಂತೆ ಕಾನೂನಿಗೆ ತಿದ್ದುಪಡಿ ತರಬೇಕಿದ್ದು, ಮುಂದಿನ ಅಧಿವೇಶನದಲ್ಲಿ ಕಾನೂನು ರಚಿಸಲಾಗುವುದು ಎಂದು ಹೇಳಿದ್ದಾರೆ.