ನವದೆಹಲಿ, ನ 04 (DaijiworldNews/DB): ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸುದನ್ ಗಾಧ್ವಿ ಅವರನ್ನು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರಾಗಿರುವ ಗಾಧ್ವಿ ಅವರು ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಇದೀಗ ಗುಜರಾತ್ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಅವರ ಹೆಸರನ್ನು ಘೋಷಿಸಲಾಗಿದೆ.
ಗುಜರಾತ್ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಜನರಿಂದಲೇ ಅಭಿಪ್ರಾಯ ಕ್ರೋಢೀಕರಿಸುವ ಕೆಲಸವನ್ನು ಎಎಪಿ ಮಾಡಿತ್ತು. ಇದಕ್ಕಾಗಿ ಎಸ್ಎಂಎಸ್, ವಾಟ್ಸಾಪ್, ವಾಯ್ಸ್ ಮೇಲ್ ಮತ್ತು ಇ-ಮೇಲ್ ಮೂಲಕ ಜನರಿಂದ ಸಿಎಂ ಅಭ್ಯರ್ಥಿ ಹೆಸರನ್ನು ಆಹ್ವಾನಿಸಲಾಗಿತ್ತು. ಗುಜರಾತ್ ಜನರ ಅಭಿಪ್ರಾಯದ ಆಧಾರದ ಮೇಲೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.