ನವದೆಹಲಿ, ನ 05 (DaijiworldNews/DB): ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕಾಂಗ್ರೆಸ್ನ ಮತ್ತೋರ್ವ ನಾಯಕ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಾಗರೋತ್ತರ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಹಿಮಾನ್ಶು ವ್ಯಾಸ್ ಶನಿವಾರ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿಮಾನ್ಶು ವ್ಯಾಸ್ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಇದೇ ವೇಳೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಅವರು ರಾಜೀನಾಮೆ ನೀಡಿದ್ದಾರೆ.
ನನ್ನ ಮಾತಿಗೆ ಪಕ್ಷದಲ್ಲಿ ಬೆಲೆ ನೀಡುತ್ತಿಲ್ಲ. ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಅವಕಾಶ ಸಿಗುತ್ತಿಲ್ಲ. ಪಕ್ಷದಲ್ಲಿ ನಾಯಕತ್ವದ ಕೊರತೆ ಇದ್ದು, ಪಕ್ಷ ಸಂಘಟನೆಯ ಇಚ್ಛಾಶಕ್ತಿ ಯಾರಿಗೂ ಇಲ್ಲದಾಗಿದೆ. ಹೀಗಾಗಿ ನೊಂದು ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.
ಈ ಹಿಂದೆ ಎರಡು ಬಾರಿ ಸುರೇಂದ್ರ ನಗರದ ವಡ್ವಾನ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹಿಮಾನ್ಶು ವ್ಯಾಸ್ ಬಿಜೆಪಿ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು.