ಛತ್ತೀಸ್ಗಢ, ನ 05 (DaijiworldNews/DB): ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೀಸಲು ಗಾರ್ಡ್ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಟ್ರಕ್ ಗೆ ಬೈಕ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ನಕ್ಸಲರ ವಿರುದ್ದದ ಕಾರ್ಯಾಚರಣೆಗಾಗಿ ಜವಾನರಿಬ್ಬರು ದಾಂತೇವಾಡ ಜಿಲ್ಲೆಯ ದಕ್ಷಿಣ ಬಸ್ತಾರ್ನ ಕೊಂಟಾ ತಹಸಿಲ್ನ ಎಲ್ಮಗುಂದ ಗ್ರಾಮಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಬೈಕ್ ಟ್ರಕ್ಗೆ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಮಾಹಿತಿ ಸಿಕ್ಕಿದ ಕೂಡಲೇ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವ್ಹಾಣ್ ಮತ್ತು ಉಪ ವಿಭಾಗದ ಪೊಲೀಸ್ ಅಧಿಕಾರಿ ಪರಮೇಶ್ವರ ತಿಲಕ್ವಾರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಟ್ರಕ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.