ದಾವಣಗೆರೆ, ನ 09 (DaijiworldNews/DB): ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ದಾವಣಗೆರೆಯಲ್ಲಿ ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವೇತನ ಪರಿಷ್ಕರಣೆ, ಸೌಲಭ್ಯ ವಿಸ್ತರಣೆ ಸಂಬಂಧಿಸಿ ಸರ್ಕಾರಿ ನೌಕರರು ಹಲವು ಸಮಯಗಳಿಂದ ಒತ್ತಾಯ ಮಾಡುತ್ತಿದ್ದರು. ಈ ನಿಟ್ಟಿನಲ್ಲಿ ವೇತನ ಆಯೋಗ ರಚನೆಗೆ ನಿರ್ಧರಿಸಲಾಗಿದೆ ಎಂದರು.
ಇನ್ನು ದಾವಣಗೆರೆ ಉತ್ತರದಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದಾವಣಗೆರೆ ಉತ್ತರದಿಂದ ಸ್ಪರ್ದಿಸುವುದಿಲ್ಲ ಎಂಬುದನ್ನು ಈ ಹಿಂದೆಯೇ ಹೇಳಿದ್ದೆ. ಅಂತಹ ಯೋಚನೆಯೇ ನನ್ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.
ವೇತನ ಆಯೋಗ ರಚನೆ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನಿಯೋಗವು ಕಳೆದ ಭಾನುವಾರ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು. ಈ ವೇಳೆ ನವೆಂಬರ್ 8ರೊಳಗೆ ವೇತನ ಆಯೋಗ ರಚಿಸಿ ತ್ವರಿತಗತಿಯಲ್ಲಿ ಮಧ್ಯಂತರ ವರದಿ ನೀಡಲು ಸೂಚನೆ ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಅಲ್ಲದೆ ಮುಂದಿನ ಮಾರ್ಚ್ ತಿಂಗಳೊಳಗೆ ಆಯೋಗದ ಶಿಫಾರಸ್ಸು ಜಾರಿಗೆ ಕ್ರಮ ವಹಿಸಲಾಗುವುದು ಎಂದಿದ್ದರು.