ಮುಂಬೈ, ನ 09 (DaijiworldNews/DB): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಕಳೆದ ಮೂರೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವುತ್ ಅವರಿಗೆ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.
ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಅವರ ಅತ್ಯಾಪ್ತರಾದ ಸಂಜಯ್ ರಾವುತ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅರ್ಜಿ ಆದೇಶವನ್ನು ಅಕ್ಟೋಬರ್ 21 ರಂದು ಕಾಯ್ದಿರಿಸಿತ್ತು. ಇದೀಗ ರಾವುತ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಮುಂಬೈ ವಸತಿ ಕಾಲೊನಿಯ ಪುನರಾಭಿವೃದ್ದಿ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಆಗಸ್ಟ್ 1ರಂದು ಅವರನ್ನು ಬಂಧಿಸಿತ್ತು. ಇದಕ್ಕೂ ಮೊದಲು ಎರಡು ಬಾರಿ ಇಡಿ ಸಮನ್ಸ್ ಜಾರಿಗೊಳಿಸಿದ್ದರೂ, ಅವರದಕ್ಕೆ ಸ್ಪಂದಿಸಿರಲಿಲ್ಲ. ಅಲ್ಲದೆ ರಾಜಕೀಯ ದ್ವೇಷದಿಂದ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ರಾವುತ್ ದೂರಿದ್ದರು.