ಬೆಂಗಳೂರು,ನ 12 (DaijiworldNews/MS): ಪ್ರಧಾನಿ ನರೇಂದ್ರ ಮೋದಿ ಅವರ ಶುಕ್ರವಾರದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಹೆಗಲ ಮೇಲೆ ಸಚಿವ ಆರ್.ಆಶೋಕ್ ಕೈ ಹಾಕಿರುವ ಪೋಟೋ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.
ಇನ್ನು ಈ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್, "ಸ್ವಾಮೀಜಿಗಳ ಹೆಗಲ ಮೇಲೆ ಕೈ ಹಾಕುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ " ಎಂದು ಟ್ವೀಟ್ ಮಾಡಿದೆ.
ಧರ್ಮ, ಸಂಸ್ಕೃತಿ ಕುರಿತು ಮಾತನಾಡುವ ಬಿಜೆಪಿ ನಾಯಕ, ಸಚಿವ ಆರ್.ಅಶೋಕ್ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿಗಳ ಹೆಗಲ ಮೇಲೆ ಕೈ ಹಾಕಿದ್ದಾರೆ. ಶ್ರೀಗಳು ಹೆಗಲ ಮೇಲೆ ಕೈಹಾಕುವಷ್ಟು ಸದರ ಎನಿಸಿದ್ದಾರೆಯೇ? ಸ್ವಾಮೀಜಿ ಎಂದರೆ ಅವರಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೀಗಿದ್ದರೂ ಒಬ್ಬರು ಶ್ರೀಗಳ ಮೇಲೆ ಕೈ ಹಾಕುವುದು ಎಷ್ಟು ಸರಿ. ಇದೇ ರೀತಿ ನೀವು ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯ ನಿಮಗಿದೆಯೇ? ಎಂದು ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
ಒಬ್ಬ ಶ್ರೀಗಳ ಹೆಗಲ ಮೇಲೆ ಕೈ ಹಾಕುವ ಕರ್ನಾಟಕ ರಾಜ್ಯ ಬಿಜೆಪಿ ನಾಯಕರಿಗೆ, ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಬಿಜೆಪಿಗರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಎರಡು ಫೋಟಗಳನ್ನು ತನ್ನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.