ಕಲಬುರ್ಗಿ, ನ 14 (DaijiworldNews/MS): ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ಸಿಬ್ಬಂದಿ ಹೈದರಾಬಾದ್ನಲ್ಲಿ ಭಾನುವಾರ ತಡರಾತ್ರಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ವಶಕ್ಕೆ ಪಡೆಯಲಾಗಿದೆ.
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು 'ನೀವು ನಮಗೆ ಶೂಟ್ ಮಾಡಿ ನಾವು ಸಾಯಲು ಸಿದ್ಧ. ತಮಗೂ ಶೂಟ್ ಮಾಡಲು ರೆಡಿ' ಎಂದು ಮಣಿಕಂಠ ರಾಠೋಡ ಅವರು ಈಚೆಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಜೀವ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್ ವಿರುದ್ಧ ಐಪಿಸಿ ಸೆಕ್ಷನ್ 506 ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಹೈದರಾಬಾದ್ನಲ್ಲಿ ಇರುವ ಮಾಹಿತಿ ಆಧರಿಸಿ ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.