ರಾಮನಗರ, ನ 15 (DaijiworldNews/DB): ಕಂಚುಗಲ್ ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 29ರವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ನಿವೃತ್ತ ಶಿಕ್ಷಕ ಮಹದೇವಯ್ಯ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಇಂದಿಗೆ ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರು ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನವೆಂಬರ್ 29ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಆರೋಪಿಗಳಿಗೆ ಇನ್ನೂ ಹಲವು ದಿನ ಜೈಲೇ ಗತಿಯಾಗಿದೆ.