ಬೆಂಗಳೂರು, ನ 16 (DaijiworldNews/MS): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್, ಪಕ್ಷದ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದು, ಇದೀಗ ಅರ್ಜಿ ಸಲ್ಲಿಸಲು ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೇ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ನಡುವೆ 224 ಕ್ಷೇತ್ರಗಳಿಗೆ 8000 ಅರ್ಜಿಗಳು ಸಲ್ಲಿಕೆಯಾಗಿದೆ. ಒಟ್ಟು 1150 ಅರ್ಜಿಗಳು ಆಕಾಂಕ್ಷಿಗಳು ಪಡೆದುಕೊಂಡಿದ್ದಾರೆ. ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಮಾರ್ ಕೂಡಾ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಘಟಾನುಘಟಿ ಮುಖಂಡರು ಇನ್ನು ಅರ್ಜಿ ಸಲ್ಲಿಸಿಲ್ಲ.
ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಐವನ್ ಡಿಸೋಜಾ, ಉತ್ತರಕ್ಕೆ ಮೊಯಿದೀನ್ ಬಾವಾ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ತೆಗೆದುಕೊಳ್ಳುವಾಗ 5 ಸಾವಿರ ರೂ. ಶುಲ್ಕ ಪಾವತಿಸಬೇಕು. ಭರ್ತಿ ಮಾಡಿದ ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ. 'ಡಿ.ಡಿ' ಮತ್ತು ಕಾಂಗ್ರೆಸ್ ಸದಸ್ಯತ್ವ ನೋಂದಣಿ ಮಾಡಿಸಿದ ವಿವರ ಒದಗಿಸಬೇಕು. ಎಸ್ಸಿ, ಎಸ್ಟಿ ವರ್ಗದವರಿಗೆ ಶುಲ್ಕದಲ್ಲಿಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.