ಥಾಣೆ, ನ 18 (DaijiworldNews/HR): ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಭಾರತ್ ಜೋಡೋ ಯಾತ್ರೆ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ದೂರು ದಾಖಲಿಸಿದ್ದಾರೆ.
ರಾಹುಲ್ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ಮಾನಹಾನಿ ಮಾಡುವ ಹೇಳಿಕೆ ನೀಡಿದ್ದು, ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 500, 501 ರ ಅಡಿಯಲ್ಲಿ ನಾನ್-ಕಾಗ್ನಿಜಬಲ್ (ಎನ್ಸಿಆರ್) ಅಪರಾಧದ ಪ್ರಕರಣವನ್ನು ಗುರುವಾರ ದಾಖಲಿಸಲಾಗಿದೆ.
ಇನ್ನು ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರಿಗೆ ಕ್ಷಮೆಯಾಚಿಸುವ ಪತ್ರಕ್ಕೆ ಸಹಿ ಹಾಕುವ ಮೂಲಕ ಸಾವರ್ಕರ್ ಅವರು ಎಂಕೆ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದ್ದರು.