ಪತ್ತನಂತಿಟ್ಟ, ನ 19 (DaijiworldNews/DB): ಶಬರಿಮಲೆಗೆ ಆಂಧ್ರದಿಂದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಲಾಹಾ ಬಳಿ ಶನಿವಾರ ನಡೆದಿದೆ. ಘಟನೆಯಲ್ಲಿ ಬಾಲಕ ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಸ್ನಲ್ಲಿ 44 ಮಂದಿ ಯಾತ್ರಾರ್ಥಿಗಳು ಸಂಚರಿಸುತ್ತಿದ್ದರು. ಎಲ್ಲರನ್ನೂ ರಕ್ಷಿಸಲಾಗಿದೆ. ಎಂಟು ವರ್ಷದ ಬಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಕೊಟ್ಟಾಯಂನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. 18 ಮಂದಿಯನ್ನು ಜನರಲ್ ಆಸ್ಪತ್ರೆಗೆ, ಇತರರನ್ನು ಸಮೀಪದ ಪೆರಿನಾಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಘಟನೆ ಮಾಹಿತಿ ಲಭಿಸಿದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಕೂಡಾ ಸ್ಥಳಕ್ಕಾಗಮಿಸಿದ್ದು, ಯಾತ್ರಾರ್ಥಿಗಳಿಗೆ ಚಿಕಿತ್ಸೆಗೆ ಏರ್ಪಾಡು ಮಾಡಿದರು.