ತೆಲಂಗಾಣ, ನ 19 (DaijiworldNews/MS): ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ವರು ಶಾಸಕರ ಖರೀದಿ ಯತ್ನ ಆರೋಪ ಸಂಬಂಧ ಹೈದರಾಬಾದ್ ವಿಶೇಷ ತನಿಖಾ ತಂಡವು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಬಂಧಿಸಲು ಮುಂದಾಗಿದ್ದ ಕ್ರಮಕ್ಕೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮುಂದಿನ ಆದೇಶದವರೆಗೂ ಸಂತೋಷ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಶನಿವಾರ ಹೇಳಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ನವೆಂಬರ್ 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್ ಸಂತೋಷ್ ಅವರಿಗೆ ಹೈದರಾಬಾದ್ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಿತ್ತು.
ಎಸ್ಐಟಿಯ ಈ ಕ್ರಮವನ್ನು ಬಿಜೆಪಿ ತೆಲಂಗಾಣ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೇಮೆಂದರ್ ರೆಡ್ಡಿ ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸಂತೋಷ್ ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿದೆ. ಇದರೊಂದಿಗೆ ಎಸ್ಐಟಿ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಸಂತೋಷ್ ಅವರಿಗೆ ನೋಟಿಸ್ ನೀಡಿರುವ ವಿಚಾರದಲ್ಲಿ ಎಸ್ಐಟಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ದೆಹಲಿ ಪೊಲೀಸರಿಗೆ ನಿರ್ದೇಶಿಸಿದೆ. ಅರ್ಜಿಯ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.