ವನಪರ್ತಿ, ನ 21 (DaijiworldNews/DB): ಕಬ್ಬು ತುಂಬಿಕೊಂಡು ಸಂಚರಿಸುತ್ತಿದ್ದ ಟ್ರ್ಯಾಕ್ಟರ್ಗೆ ಗರುಡ ಬಸ್ ಢಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ವನಪರ್ತಿ ಜಿಲ್ಲೆಯ ಕೊತ್ತಕೋಟ ಮಂಡಲದ ರಾಷ್ಟ್ರೀಯ ಹೆದ್ದಾರಿಯ ಮುಮ್ಮಲ್ಲಪಲ್ಲಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಟ್ರ್ಯಾಕ್ಟರ್ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಮಿಯಾಪುರ ಡಿಪೋ ಗರುಡ ಬಸ್ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಬಸ್ ಹೈದರಾಬಾದ್ನಿಂದ ಬೆಂಗಳೂರಿಗೆ ಸಂಚರಿಸುತ್ತಿತ್ತು. ಚಾಲಕ, ಪ್ರಯಾಣಿಕ ಮತ್ತು ಕ್ಲೀನರ್ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಪಘಾತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರಕ್ಕೆ ತೊಡಕಾಗಿದ್ದು, ಬಳಿಕ ಪೊಲೀಸರು ಟ್ರಾಫಿಕ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.