ಬೆಂಗಳೂರು, ನ 22 (DaijiworldNews/HR): ಮಂಗಳೂರಿನ ನಾಗೋರಿಯಲ್ಲಿ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಹಸ್ತಾಂತರಿಸುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸ್ಫೋಟದಲ್ಲಿ ಗಾಯಗೊಂಡಿರುವ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಗಂಟಲಿನಲ್ಲಿ ಪೈಪ್ ಇದೆ ಮತ್ತು ಅವನಿಗೆ ಮಾತನಾಡಲು ಸಾಧ್ಯವಿಲ್ಲ. ಕುಟುಂಬ ಸದಸ್ಯರು ಆತನ ಗುರುತನ್ನು ಖಚಿತಪಡಿಸಿದ್ದು, ನಾವು ಎನ್ಐಎಗೆ ವಿವರಗಳನ್ನು ನೀಡಿದ್ದೇವೆ. ಆದರೆ ಪ್ರಕರಣವನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.
ಇನ್ನು ಪೊಲೀಸರು ಆರೋಪಿಯ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಿದ್ದು, ವಿವಿಧ ಸ್ಥಳಗಳೊಂದಿಗೆ ಆತನ ಸಂಪರ್ಕದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.