ನವದೆಹಲಿ, ನ 30 (DaijiworldNews/MS): ಸುಪ್ರೀಂಕೋರ್ಟ್ ನಲ್ಲಿ ಇಂದು ನಿಗದಿಯಾಗಿದ್ದ ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕರಣದ ವಿಚಾರಣೆ ಮುಂದೂಡಲ್ಪಟ್ಟಿದೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗುವುದರಿಂದ ಇಂದು ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಪುನರ್ ವಿಂಗಡಣಾ ಕಾಯಿದೆ 1956ರ ಸೆಕ್ಷನ್ 3,7 & 8 ರ ಅಡಿ ಕೆಲವು ಭಾಗಗಳು ಸಂವಿಧಾನದ 14 ಮತ್ತು 29ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಆಕ್ಷೇಪಿಸಿ ಮಹಾರಾಷ್ಟ್ರ ಸರ್ಕಾರವು 2004ರಲ್ಲಿ ಸಲ್ಲಿಸಿರುವ ಅಸಲು ದಾವೆಯನ್ನು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್, ವಿ ರಾಮಸುಬ್ರಣಿಯನ್ ಮತ್ತು ಬಿ ವಿ ನಾಗರತ್ನ ಅವರ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆಗೆ ಬರಬೇಕಿತ್ತು.
ಮಹಾರಾಷ್ಟ್ರದ ದೂರಿನಲ್ಲಿ ಉಲ್ಲೇಖಿಸಿರುವ ಕೆಲವು ಪ್ರದೇಶ/ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿದ್ದು, ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಬೇಕು ಎಂದು ವಾದಿಸಲಾಗಿದೆ.ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ಮತ್ತು ಕರ್ನಾಟಕ ಸರ್ಕಾರವನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿತ್ತು.