ಅಹಮದಾಬಾದ್, ಡಿ 01 (DaijiworldNews/DB): ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಈ ನಡುವೆ ಬಿಜೆಪಿ ಅಭ್ಯರ್ಥಿಯೊಬ್ಬರಿಗೆ ಅಪರಿಚಿತರ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ವನ್ಸ್ಡಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಯುಷ್ ಪಟೇಲ್ ಅವರ ಮೇಲೆ ದುಷ್ಕರ್ಮಿಗಳು ವನ್ಸ್ಡಾದ ಝಾರಿ ಗ್ರಾಮದಲ್ಲಿ ಹಲ್ಲೆ ನಡೆಸಿದ್ದಾರೆ. ಇದರಿಂದ ಪಟೇಲ್ ಗಾಯಗೊಂಡಿದ್ದಾರೆ. ಅಲ್ಲದೆ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಧ್ವಂಸಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಪಿಯುಷ್ ಪಟೇಲ್ ಅವರ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಅನಂತ್ ಪಟೇಲ್ ಬೆಂಬಲಿಗರು ದಾಳಿ ನಡೆಸಿದ್ದಾರೆಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಪಿಯುಷ್ ಬೆಂಬಲಿಗರು ವನ್ಸ್ಡಾ ಪೊಲೀಸ್ ಠಾಣೆ ಮುಂಭಾಗ ತೆರಳಿ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು (ಡಿ.1) ನಡೆಯುತ್ತಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 5ರಂದು ನಡೆಯಲಿದೆ. ಡಿಸೆಂಬರ್ 8ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.