ಬೆಂಗಳೂರು, ಡಿ 02 (DaijiworldNews/DB): ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಚಿಕಿತ್ಸೆ ಪಡೆದಿದ್ದ ಜಾಗದಲ್ಲಿ ಗುಳ್ಳೆಯೊಂದು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆಂದು ತಿಳಿದು ಬಂದಿದೆ.
ಈ ಹಿಂದೆ ಮೂಲವ್ಯಾಧಿಗೆ ಸಿದ್ದರಾಮಯ್ಯ ಚಿಕಿತ್ಸೆ ಪಡೆದಿದ್ದರು. ಇದೀಗ ಆ ಚಿಕಿತ್ಸೆ ಪಡೆದಿರುವ ಜಾಗದಲ್ಲಿ ಗುಳ್ಳೆಯೊಂದು ಎದ್ದಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ವೈದ್ಯರು ಶಿಫಾರಸ್ಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.
ಇಂದು ಸಂಜೆಯೇ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ. ಇನ್ನು ಶಸ್ತ್ರಚಿಕಿತ್ಸೆ ಬಳಿಕ ಸುಮಾರು ನಾಲ್ಕೈದು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಎಲ್ಲಾ ಪ್ರವಾಸ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.