ಕೇರಳ, ಡಿ 02 (daijiworldNews/SM): ಸೌದಿ ಅರೇಬಿಯಾದ ಜೆಡ್ಡಾದಿಂದ ಹೊರಟಿದ್ದ ಸ್ಪೈಸ್ಜೆಟ್ ವಿಮಾನವು ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸ್ಪೈಸ್ಜೆಟ್ನ SG-306 ವಿಮಾನವು ಕೋಝಿಕ್ಕೋಡ್ಗೆ ಹಾರುತ್ತಿದ್ದಾಗ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ ಕಾಣಿಸಿಕೊಂಡಿದೆ. ಈ ಕಾರಣದಿಂದಾಗಿ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ ಮಾಡುವುದಕ್ಕಾಗಿ ತಿರುಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಸಂಜೆ 6.27ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ರಾತ್ರಿ 7.19ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸ್ಥಿತಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ತುರ್ತು ಪರಿಸ್ಥಿತಿಯನ್ನು ಎದುರಿಸಲು ವಿಮಾನ ನಿಲ್ದಾಣವು ಸಂಪೂರ್ಣ ಸಜ್ಜಾಗಿದೆ ಎಂದು ಕೊಚ್ಚಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಎಸ್ ಸುಹಾಸ್ ತಿಳಿಸಿದ್ದಾರೆ. ಈ ವಿಮಾನ ನಿಲ್ದಾಣದ ಎಚ್ಚರಿಕೆಯ ರಚನೆಯನ್ನು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ, ರನ್ವೇಯನ್ನು ಪರಿಶೀಲಿಸಿ ನಂತರ ಸಾಮಾನ್ಯ ಕಾರ್ಯಾಚರಣೆಗೆ ಹಸ್ತಾಂತರಿಸಲಾಯಿತು.