ನವದೆಹಲಿ, ಡಿ 03(DaijiworldNews//DB): 2020ರಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಅಗೇನ್ಸ್ಟ್ ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
2020 ಫೆಬ್ರವರಿ 24 ರಂದು ಮೈನ್ ಕರವಾಲ್ ನಗರ ರಸ್ತೆಯಲ್ಲಿ ಉಂಟಾದ ಗಲಭೆ ವೇಳೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಆರೋಪಿಸಿ ಕಾನ್ಸ್ಟೆಬಲ್ ಸಂಗ್ರಾಮ್ ಸಿಂಗ್ ಅವರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಅದರಂತೆ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಈ ಬಗ್ಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮಧುಕರ್ ಪಾಂಡೆ ಅವರು ಮಾಹಿತಿ ನೀಡಿದ್ದಾರೆ.
ಉಮರ್ ಖಾಲಿದ್ ಇತರ ವಿವಿಧ ಪ್ರಕರಣಗಳಲ್ಲಿ ಸಹ ಆರೋಪಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ಗಲಭೆಗಳ ವಿಚಾರವಾಗಿ ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯಲ್ಲಿಯೂ ಪ್ರಕರಣಗಳು ದಾಖಲಾಗಿದ್ದು, ಇವುಗಳ ವಿಚಾರಣೆ ಬಾಕಿ ಇದೆ ಎಂಬುದಾಗಿ ತಿಳಿದು ಬಂದಿದೆ.