ನವದೆಹಲಿ, ಡಿ 9 (DaijiworldNews/HR): ಶಿರಾಡಿ ಘಾಟಿ ಸುರಂಗ ಮಾರ್ಗ ಹೆದ್ದಾರಿ ಯೋಜನೆಯನ್ನು ಕೇಂದ್ರ ಸರಕಾರ ಕೈಬಿಡುವ ಸೂಚನೆಗಳು ಗೋಚರಿಸಿದ್ದು, ಈ ಯೋಜನೆಯು ದೊಡ್ಡ ಮೊತ್ತವನ್ನು ಬಯಸುತ್ತದೆ ಹಾಗೂ ಅನೇಕ ಸವಾಲುಗಳಿಂದ ಕೂಡಿರುವ ಕಾರಣ ಕಾರ್ಯಸಾಧುವಲ್ಲ ಎಂದು ಕೇಂದ್ರ ತಿಳಿಸಿದೆ.
ಲೋಕಸಭೆಯಲ್ಲಿ ಗುರುವಾರ ಸಂಸದ ನಳಿನ್ ಕುಮಾರ್ ಕಟೀಲು ಅವರ ಪ್ರಶ್ನೆಗೆ ಕೇಂದ್ರ ಹೆದ್ದಾರಿ, ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿಯವರು ನೀಡಿರುವ ಉತ್ತರದಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ.
ಮಂಗಳೂರಿಗೆ ಫೆಬ್ರವರಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ,ಶಿಲಾನ್ಯಾಸಕ್ಕಾಗಿ ಆಗಮಿಸಿದ್ದ ಗಡ್ಕರಿಯವರು 6 ಲೇನ್ನ ಶಿರಾಡಿ ಘಾಟ್ ಸುರಂಗ ಮಾರ್ಗ ಯೋಜನೆಯನ್ನು ಶೀಘ್ರ ಕೈಗೆತ್ತಿಕೊಳ್ಳುತ್ತೇವೆ, ಇದಕ್ಕಾಗಿ 14 ಸಾವಿರ ಕೋಟಿ ರೂ.ನ ಯೋಜನೆ ಸಿದ್ಧವಾಗಿದೆ ಎಂದು ತಿಳಿಸಿದ್ದರು.
ಶಿರಾಡಿ ಭಾಗದಲ್ಲಿ ಸಂಚಾರ ದಟ್ಟಣೆ ಸುಗಮ ಗೊಳಿಸಲೋಸುಗ ಈಗಿರುವ 2-ಪಥ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸಲಾಗುತ್ತದೆ, ಇದಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸಾಧ್ಯತಾ ವರದಿ (ಡಿಪಿಆರ್) ತಯಾರಿಕೆ ತಜ್ಞರನ್ನು ನೇಮಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಮಂಗಳೂರು ಹಾಗೂ ಬೆಂಗಳೂರು ಮಧ್ಯೆ ಸರಕು ಸಾಗಣೆ ಹಾಗೂ ಜನರ ಸಂಚಾರವನ್ನು ಸುಗಮಗೊಳಿಸುವ ದೃಷ್ಟಿಯಿಂದ ಈ ಯೋಜನೆ ಬಹಳ ಮಹತ್ವದ್ದು ಎಂದು ಈ ಭಾಗದ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿಗಳು ಹಿಂದಿನಿಂದಲೂ ಪ್ರತಿಪಾದಿಸಿದ್ದಾರೆ.