ನವದೆಹಲಿ, ಡಿ 09 (DaijiworldNews/DB): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸರ್ಕಾರ ರಚಿಸುವ ಸಲುವಾಗಿ ಸಿಎಂ ಭೂಪೇಂದ್ರ ಪಟೇಲ್ ಅವರು ಇಂದು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಗಾಂಧಿನಗರದ ರಾಜಭವನಕ್ಕೆ ಆಗಮಿಸಿ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ನೀಡಿದರು.
ಇನ್ನು ನಾಳೆ ಬೆಳಗ್ಗೆ 10 ಗಂಟೆಗೆ ಬಿಜೆಪಿಯ ಪ್ರಧಾನ ಕಚೇರಿ ಕಮಲಂನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ನೂತನ ಸರ್ಕಾರ ರಚಿಸುವ ಸಲುವಾಗಿ ನಾಳೆ ಮಧ್ಯಾಹ್ನ 2 ಗಂಟೆಗೆ ಪಕ್ಷದ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ರಾಜ್ಯದ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರೇ ಮುಂದುವರಿಯಲಿದ್ದಾರೆ. ಡಿಸೆಂಬರ್ 12ರಂದು ಮುಖ್ಯಮಂತ್ರಿಯಾದಿಯಾಗಿ ಗುಜರಾತ್ನ ಹೊಸ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕರಿಸಲಿದ್ದು, ಸುಮಾರು 12ಕ್ಕೂ ಹೆಚ್ಚು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕೂಡಾ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ತಿಳಿಸಿದ್ದಾರೆ.