ಶಿಮ್ಲಾ, ಡಿ 10 (DaijiworldNews/DB): ಸುಖ್ವಿಂದರ್ ಸಿಂಗ್ ಸುಖು ಅವರ ಹೆಸರನ್ನು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದ್ದು, ಇಂದು ಸಂಜೆಯೊಳಗೆ ಅಧಿಕೃತ ಪ್ರಕಟಣೆ ಹೊರ ಬೀಳುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತಿದ್ದಂತೆ ಸಿಎಂ ಹುದ್ದೆಗಾಗಿ ಪ್ರಬಲ ಪೈಪೋಟಿ ಎದುರಾಗಿತ್ತು. ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಸೇರಿದಂತೆ ಹಲವರು ಈ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಆದರೆ ಕೆಲವೇ ಸಮಯಗಳ ಹಿಂದೆ ಶಾಸಕರ ಬೆಂಬಲದ ಕೊರತೆಯಿಂದಾಗಿ ಪ್ರತಿಭಾ ಸಿಂಗ್ ಸಿಎಂ ರೇಸ್ನಿಂದ ಹೊರಗುಳಿದಿದ್ದರು. ಇನ್ನು ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಕೂಡಾ ರೇಸ್ನಲ್ಲಿದ್ದು, ಅಂತಿಮವಾಗಿ 58 ವಷ್ದ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಹೈಕಮಾಂಡ್ ಸಿಎಂ ಸ್ಥಾನಕ್ಕೆ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ನಾದೌನ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸುಖು, 2013ರಿಂದ 2019ರವರೆಗೆ ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಇನ್ನು ಈ ವಿಚಾರದ ಬಗ್ಗೆ ಮಾತನಾಡಿದ ಸುಖ್ವಿಂದರ್ ಸಿಂಗ್ ಸುಖು ಅವರು, ನನಗೆ ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ. ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಗೆ ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಸೌಹಾರ್ದದೊಂದಿಗೆ ಪಕ್ಷ ಮುನ್ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.
ಇನ್ನು ಸುಖು ಅವರ ಹೆಸರನ್ನು ಹೈಕಮಾಂಡ್ ಅನುಮೋದಿಸುತ್ತಿದ್ದಂತೇ ಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದ ಪ್ರತಿಭಾ ಸಿಂಗ್ ಬೆಂಗಲಿಗರು ಘೋಷಣೆಗಳನ್ನು ಕೂಗಿದ್ದು ಪ್ರತಿಭಾ ಸಿಂಗ್ಗೆ ಹೈಕಮಾಂಡ್ ಹುದ್ದೆ ನೀಡಬೇಕೆಂದು ಒತ್ತಾಯಿಸಿದ್ದಾರೆಂದು ತಿಳಿದು ಬಂದಿದೆ.