ಶಿಮ್ಲಾ, ಡಿ. 10 (DaijiworldNews/SM) : ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ಕೈಯಲ್ಲಿದ್ದ ಅಧಿಕಾರವನ್ನು ಕಸಿದುಕೊಂದಿದೆ. ಇದೀಗ ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರು ರವಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಖ್ವಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಶನಿವಾರ ಆಯ್ಕೆ ಮಾಡಿದೆ.
ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ಒಂದು ದಿನದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಸುಖ್ವಿಂದರ್ ಸಿಂಗ್ ಸುಖು ಅವರು ನಾಳೆ ಬೆಳಗ್ಗೆ 11 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.