ನವದೆಹಲಿ, ಡಿ 11 (DaijiworldNews/DB): ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯು ಗೆಲುವು ಸಾಧಿಸುವ ಮೂಲಕ ಬಿಜೆಪಿ ಒಂದೂವರೆ ದಶಕದ ಅಧಿಕಾರಕ್ಕೆ ಅಂತ್ಯ ಹಾಡಿತ್ತು. ಇದರ ಬೆನ್ನಲ್ಲೇ ಆದೇಶ್ ಗುಪ್ತಾ ರಾಜೀನಾಮೆ ನೀಡಿದ್ದು, ಬಿಜೆಪಿ ಹೈಕಮಾಂಡ್ ರಾಜೀನಾಮೆಯನ್ನು ಅಂಗೀಕಾರ ಮಾಡಿದೆ ಎಂದು ತಿಳಿದು ಬಂದಿದೆ.
ಇನ್ನು ಆದೇಶ್ ಗುಪ್ತಾ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ದೆಹಲಿ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿದ್ದ ವೀರೇಂದ್ರ ಸಚ್ದೇವ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ವರಿಷ್ಠರು ನೇಮಕಗೊಳಿಸಿದ್ದಾರೆ. ಖಾಯಂ ಅಧ್ಯಕ್ಷರ ಆಯ್ಕೆಯಾಗುವವರೆಗೂ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಅಸ್ತಿತ್ವದಲ್ಲಿದ್ದ ಉತ್ತರ ದೆಹಲಿ ಪಾಲಿಕೆಯ ಮೇಯರ್ ಆಗಿಯೂ ಆದೇಶ್ ಗುಪ್ತಾ ಕಾರ್ಯನಿರ್ವಹಿಸಿದ್ದರು.