ಬೆಳಗಾವಿ, ಡಿ 13 ( DaijiworldNews/MS): ರಾಜ್ಯದಲ್ಲಿ ಗುಜರಾತ್ ಮಾದರಿಯಂತೆ ಟಿಕೆಟ್ ಹಂಚಿಕೆಯಾಗಲಿದೆ. ಗುಜರಾತ್ ಚುನಾವಣೆಯಲ್ಲಿ ಹಾಲಿ ಶಾಸಕರು ಸೇರಿದಂತೆ ಘಟಾನುಘಟಿ ನಾಯಕರಿಗೆ ಟಿಕೆಟ್ ನೀಡದೇ ಹೊಸಬರಿಗೆ ಅವಕಾಶ ನೀಡಲಾಗಿದ್ದುಇದೇ ಮಾದರಿಯನ್ನ ರಾಜ್ಯದಲ್ಲಿ ಅಳವಡಿಕೆ ಮಾಡಲು ಸಜ್ಜಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು ,ಇದು ಹಲವು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ.
ನಗರದಲ್ಲಿ ಮಾತನಾಡಿದ ಅವರು, ಗುಜರಾತ್ ನಲ್ಲಿ ನಡೆಸಿದ ಈ ಪ್ರಯೋಗದಲ್ಲಿ ಬಿಜೆಪಿ ಹೈಕಮಾಂಡ್ ಸಕ್ಸಸ್ ಆಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಚುಕ್ಕಾಣಿ ಹಿಡಿದಿದ್ದಾರೆ.ಬಹಳಷ್ಟು ಬದಲಾವಣೆ ಆಗಲಿದೆ. ಯಾರ ಮೇಲೆ ಆರೋಪ ಇದೆ ಅವರನ್ನು ಕೈ ಬಿಡಲಿದೆ ಹಾಗೂ ಒಂದೇ ಕುಟುಂಬಕ್ಕೆ ಎರಡು ಮೂರು ಟಿಕೆಟ್ ಈ ಬಾರಿ ಖಂಡಿತಾ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೊಂದೆಡೆ ರಾಜ್ಯದಲ್ಲೂ ದಿಗ್ವಿಜಯ ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ ಸಾಕಷ್ಟು ಪ್ಲ್ಯಾನ್ ಮಾಡಿಕೊಂಡಿದ್ದು ಜನವರಿಯಿಂದಲೇ ರಾಜ್ಯದಲ್ಲೇ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.ಈ ಎಲ್ಲ ಬೆಳವಣಿಗೆಗಳ ನಡುವೆ ಇದೀಗ ಟಿಕೆಟ್ ಹಂಚಿಕೆ ವಿಚಾರ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು ಹಾಲಿ ಮತ್ತು ಮಾಜಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ.