ನವದೆಹಲಿ, ಡಿ 14 (DaijiworldNews/DB): ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯು ಪ್ರಸ್ತುತ ರಾಜಸ್ಥಾನದಲ್ಲಿ ಸಾಗುತ್ತಿದ್ದು, ಬುಧವಾರ ಬೆಳಗ್ಗೆ ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಯಾತ್ರೆಯಲ್ಲಿ ಪಾಲ್ಗೊಂಡರು.
ರಾಹುಲ್ ಗಾಂಧಿ ಹಾಗೂ ಸಚಿನ್ ಪೈಲಟ್ ಅವರೊಂದಿಗೆ ರಘುರಾಮ್ ರಾಜನ್ ಅವರು ಯಾತ್ರೆಯಲ್ಲಿ ಕಾಣಿಸಿಕೊಂಡರು. ರಾಜಸ್ಥಾನದ ಸವಾಯಿ ಮಾಧೋಪುರದ ಭಡೋತಿಯಿಂದ ಬೆಳಗ್ಗೆ ಯಾತ್ರೆ ಪ್ರಾರಂಭಗೊಂಡಿತು.
ಈ ಹಿಂದೆ 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯೀಕರಣ ನಿರ್ಧಾರವನ್ನು ರಘುರಾಮ್ ರಾಜನ್ ಟೀಕಿಸಿದ್ದರು. ಅಲ್ಲದೆ ತಮ್ಮ ಐ ಡೂ ವಾಟ್ ಐ ಡೂ ಪುಸ್ತಕದಲ್ಲಿಯೂ ಈ ವಿಚಾರವನ್ನು ಟೀಕಿಸಿದ್ದರು. ದೇಶದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆ ಬಗ್ಗೆಯೂ ಅವರು ಆತಂಕ ವ್ಯಕ್ತಪಡಿಸಿದ್ದರು.
ಸೆಪ್ಟಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಈಗಾಗಲೇ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಂಚರಿಸಿದ್ದು, ಇದೀಗ ಮಧ್ಯಪ್ರದೇಶದಲ್ಲಿ ನಡೆಯುತ್ತಿದೆ. 2023ರ ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತಿಮಗೊಳ್ಳಲಿದೆ. ಈಗಾಗಲೇ ಹಲವು ಖ್ಯಾತನಾಮರು ರಾಹುಲ್ ಗಾಂಧಿಯವರೊಂದಿಗೆ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ.