ಬೆಂಗಳೂರು, ಡಿ 20 ( DaijiworldNews/MS): ನಾಳೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ವೈ ಎ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹಾಜರಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಹೊರಟ್ಟಿ, ನನಗೆ ಇದೊಂದು ಅವಿಸ್ಮರಣೀಯ ದಿನವಾಗಿದ್ದು , ಸಿಎಂ, ಯಡಿಯೂರಪ್ಪ, ಅಶೋಕ ಸೇರಿ ನಮ್ಮ ಪಕ್ಷದ ನಾಯಕರೆಲ್ಲರೂ ಬಂದಿದ್ದರು. ನಾನು ಅತ್ಯಂತ ವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ.ಪಕ್ಷ ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸವನ್ನು ಎಂದೆಂದೂ ದುರುಪಯೋಗ ಮಾಡದೆ ಒಳ್ಳೆಯ ಹೆಸರು ತರುವಂತೆ ಕೆಲಸ ಮಾಡಲಿದ್ದೇನೆ ಎಂದರು.