ಬೆಂಗಳೂರು, ಡಿ 23 (DaijiworldNews/HR): ಸಿದ್ದರಾಮಯ್ಯ ಅವರು ಆಗಸ್ಟ್ 18ರಂದು ಕೊಡಗು ಪ್ರವಾಸ ಕೈಗೊಂಡಿದ್ದಾಗ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆಯಾಜ್ಞೆ ನೀಡಿದೆ ಎಂದು ವರದಿಯಾಗಿದೆ.
ಆರೋಪಿಗಳಾಗಿರುವ ಎನ್.ಡಿ. ಸಂಪತ್ ಕುಮಾರ್ ಮತ್ತು ಬಿ.ಎಂ.ಸಂತೋಷ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಸ್. ರಾಚಯ್ಯ ಅವರಿದ್ದ ರಜಾ ಕಾಲದ ವಿಶೇಷ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಆದೇಶ ನೀಡಿರುವುದಾಗಿ ವರದಿಯಾಗಿದೆ.
ಇನ್ನು ಅರ್ಜಿದಾರರ ಪರ ವಕೀಲರು ವಾದಿಸಿ ಘಟನೆಯಲ್ಲಿ ಆರೋಪಿಗಳ ಪಾತ್ರವಿದೆ ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಬಂಧನ ಮಾಡಲಾಗಿದ್ದು, ಇದು ಕಾನೂನು ಬಾಹಿರ ಕ್ರಮವಾರುವುದರಿಂದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದ್ದಾರೆ.
ವಾದ ಆಲಿಸಿದ ನ್ಯಾಯಪೀಠ, ಮೇಲ್ನೋಟಕ್ಕೆ ಅರ್ಜಿದಾರರ ವಾದದಲ್ಲಿ ಹುರುಳಿದೆ ಎನಿಸುತ್ತಿದೆ ಎಂದು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ.