ಬೆಂಗಳೂರು/ ಬೆಳಗಾವಿ, ಡಿ 26 (DaijiworldNews/DB): ಚೀನಾ, ಅಮೆರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್ಲೈನ್ಸ್ ಪ್ರಕಟಿಸಿದೆ.
ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಶಾಲೆ, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆ, ಕಾಲೇಜು ತರಗತಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವ ಮೊದಲು ಸ್ಯಾನಿಟೈಸ್ ಮಾಡಬೇಕು ಎಂದರು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶವಿದೆ. ಬಾರ್, ಪಬ್, ಹೊಟೇಲ್ ಸಿಬಂದಿ, ಗ್ರಾಹಕರು ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು. ಗರ್ಭಿಣಿಯರಿಗೆ ಹೊಸ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರವೇಶ ಕಲ್ಪಿಸಲಾಗುವುದಿಲ್ಲ. ನಿಯಮ ಪಾಲನೆಯನ್ನು ಎಲ್ಲರೂ ಮಾಡಬೇಕು ಎಂದು ಸೂಚಿಸಿದರು.
ಆರೋಗ್ಯ ಸಚಿವ ಡಾ. ಸುಧಾಕರ್ ಮಾತನಾಡಿ, ಹೊಸ ವರ್ಷಾಚರಣೆಗೆ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಗಳಿಗೆ ತೆರಳುವಾಗ ಮಾಸ್ಕ್ ಧರಿಸಿಯೇ ಹೋಗಬೇಕು. ಅಲ್ಲಿನ ಸಿಬಂದಿಗೂ ಈ ನಿಯಮ ಅನ್ವಯವಾಗುತ್ತದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧವಿಲ್ಲದಿದ್ದರೂ, ನಿಯಮ ಪಾಲನೆ ಅಗತ್ಯ ಎಂದರು.