ವಿಶಾಖಪಟ್ಟಣಂ, ಡಿ 27 (DaijiworldNews/DB): ಆಂಧ್ರಪ್ರದೇಶದ ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಸಜೀವದಹನವಾದ ಘಟನೆ ಡಿಸೆಂಬರ್ 26ರ ಸೋಮವಾರ ತಡರಾತ್ರಿ ನಡೆದಿದೆ.
ಆಂಧ್ರದ ಅನಕಾಪಲ್ಲಿಯಲ್ಲಿ ಘಟನೆ ಸಂಭವಿಸಿದ್ದು, ನಾಲ್ವರು ಮೃತಪಟ್ಟರೆ, ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ವಹಣೆ ಕೆಲಸ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.
ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ರಾಜ್ಯ ಕೈಗಾರಿಕಾ ಸಚಿವ ಅಮರನಾಥ್, ಸಿಎಂ ಜಗನ್ಮೋಹನ್ ರೆಡ್ಡಿ ಅವರಿಗೆ ಅವಘಡದ ಸಂಪೂರ್ಣ ಮಾಹಿತಿ ನೀಡಿದ್ದೇನೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿಯವರು ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.