ನವದೆಹಲಿ, ಡಿ 29 (DaijiworldNews/DB): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯ ಉಂಟಾಗಿದ್ದು, ಅವರಿಗೆ ಸೂಕ್ತ ಭದ್ರತೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಪತ್ರ ಬರೆದಿದೆ.
ಯಾತ್ರೆಯಲ್ಲಿ ಹಲವು ಬಾರಿ ಭದ್ರತಾ ಲೋಪ ಎದುರಾಗಿದ್ದು, ರಾಹುಲ್ ಗಾಂಧಿಯವರಿಗೆ ನೀಡಿರುವ ಝಡ್ ಪ್ಲಸ್ ಭ್ರತೆಯನ್ನು ದೆಹಲಿ ಪೊಲೀಸರು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರ ಬರೆದಿದ್ದಾರೆ.
ದೇಶದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನಿರ್ಮಿಸಲು ಕೈಗೊಂಡ ಯಾತ್ರೆ ಇದಾಗಿದೆ. ಇದರಲ್ಲಿ ಸರ್ಕಾರ ದ್ವೇಷ ರಾಜಕಾರಣ ಮಾಡದೇ, ಪಂಜಾಬ್, ಹರ್ಯಾಣ ಮುಂತಾದ ಸೂಕ್ಷ್ಮ ಪ್ರದೇಶಗಳಲ್ಲಿ ರಾಹುಲ್ ಗಾಂಧಿ ಹಾಗೂ ಯಾತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲು ಸರ್ಕಾರಕ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕೆಲವೆಡೆ ಜನಸಂದಣಿ ಹೆಚ್ಚಿದ್ದು, ರಾಹುಲ್ ಗಾಂಧಿಯವರ ಸುತ್ತ ಪರಿಧಿ ನಿರ್ವಹಿಸಲು ದೆಹಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದೂ ಇದೇ ವೇಳೆ ದೂರಿದ್ದಾರೆ.