ಕೋಲ್ಕತಾ, ಡಿ 29 (DaijiworldNews/DB): ಪಶ್ಚಿಮ ಬಂಗಾಳದ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ತೋಟಗಾರಿಕೆ ಸಚಿವಾಲಯದ ರಾಜ್ಯ ಸಚಿವ ಸುಬ್ರತಾ ಸಹಾ ಅವರು ಇಂದು ಬೆಳಗ್ಗೆ ಹಠಾತ್ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಚೇತರಿಸಿಕೊಂಡು ಬುಧವಾರ ಮನೆಗೆ ಮರಳಿದ್ದರು. ಆದರೆ ರಾತ್ರಿ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಬೆರ್ಹಾಂಪೋರ್ನ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ 10.40ರ ಸುಮಾರಿಗೆ ವಿಧಿವಶರಾದರು. ಅವರಿಗೆ 69 ವರ್ಷವಯಸ್ಸಾಗಿತ್ತು.
ಮುರ್ಷಿದಾಬಾದ್ನ ಸಾಗರ್ದಿಘಿಯಿಂದ ಶಾಸಕರಾಗಿರುವ ಅವರು, ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ತೋಟಗಾರಿಕೆ ಸಚಿವಾಲಯದ ರಾಜ್ಯ ಸಚಿವ ಸ್ಥಾನವನ್ನು ಅಲಂಕರಿಸಿದ್ದರು. ತಮ್ಮ ಸಂಪುಟ ಸಹೋದ್ಯೋಗಿಯ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಅವರು ಹಲವು ಕೊಡುಗೆಗಳನ್ನು ನೀಡಿದ್ದಾರೆ ಎಂದು ಸ್ಮರಿಸಿದರು.