ನವದೆಹಲಿ, ಡಿ 30 ( DaijiworldNews/MS): ದೆಹಲಿ ಹಾಗೂ ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಿಭಜಕಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಿಷಭ್ ಪಂತ್ ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಿಷಭ್ ತಾಯಿಗೆ ಸಪ್ರೈಸ್ ನೀಡಲು ಉತ್ತರಾಖಂಡದಿಂದ ದೆಹಲಿಯ ಮನೆಗೆ ಪ್ರಯಾಣಿಸುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಇನ್ನು ಈ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರು ವೇಗವಾಗಿ ಚಲಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಬಳಿಕ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ರೈಲಿಂಗ್ ಗೆ ಢಿಕ್ಕಿ ಹೊಡೆದಿದೆ. ಈ ದೃಶ್ಯ ನೋಡಿ ನಿಜಕ್ಕೂ ರಿಷಬ್ ಪ್ರಾಣಾಪಾಯದಿಂದ ಪಾರಾಗಿದ್ದೇ ಅದೃಷ್ಟ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಭೀಕರ ಕಾರು ಅಪಘಾತದ ನಂತರ ಪಂತ್ ಬಗ್ಗೆ ಆರೋಗ್ಯ ಸ್ಥಿತಿಯ ಬಗ್ಗೆ ಟ್ವೀಟ್ ಮಾಡಿ " ನಾನು ಅವರ ಕುಟುಂಬ ಮತ್ತು ಚಿಕಿತ್ಸೆ ನೀಡುವ ವೈದ್ಯರೊಂದಿಗೆ ಮಾತನಾಡಿದ್ದೇನೆ. ರಿಷಭ್ ಆರೋಗ್ಯ ಸ್ಥಿರವಾಗಿದ್ದು, ಸ್ಕ್ಯಾನ್ ಮಾಡಲಾಗುತ್ತಿದೆ. ನಾವು ಅವರ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅವರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತೇವೆ” ಎಂದು ಹೇಳಿದ್ದಾರೆ.