ನವದೆಹಲಿ, ಜ 03 ( DaijiworldNews/MS): 'ನಡೆದಾಡುವ ದೇವರು, ಶತಮಾನದ ಸಂತ , ಪಾಂಡಿತ್ಯಪೂರ್ಣ ಪ್ರವಚನ ಮತ್ತು ಶಕ್ತಿಯುತ ವಾಗ್ಮಿಗಳಿಗೆ ಹೆಸರಾಗಿದ್ದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳು(82) ವಿಜಯಪುರದಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ.
ಇವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ, ʻಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು. ಅವರು ಇತರರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಓಂ ಶಾಂತಿʼ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಬೆಳಗ್ಗೆ 5 ರಿಂದ ಸಂಜೆ 5 ರವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.