ಬೆಂಗಳೂರು, ಜ 03 ( DaijiworldNews/MS): 'ಅಮಿತ್ ಶಾ ಅವರು ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಒಪ್ಪಿಕೊಂಡಿರುವುದನ್ನು ನಾನು ಅಭಿನಂದಿಸುತ್ತೇನೆ' ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ‘ಅಮಿತ್ ಶಾ ಅವರ ಮಾತಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಅಮಿತ್ ಶಾ ಅವರು ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಒಪ್ಪಿಕೊಂಡಿರುವುದನ್ನು ನಾನು ಅಭಿನಂದಿಸುತ್ತೇನೆ. ಈ ಕಾರಣಕ್ಕೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರು ಆಗಮಿಸುತ್ತಿದ್ದು, ಇದರರ್ಥ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಸಂಪೂರ್ಣ ವೈಫಲ್ಯ ಅನುಭವಿಸಿದೆ ಎಂದು. ಹೀಗಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಕರ್ನಾಟಕದ ವಿಚಾರಗಳೇ ಬೇರೆ. ರಾಜ್ಯದಲ್ಲಿನ ಆಡಳಿತ, ಅಭಿವೃದ್ಧಿಯ ವಿಚಾರ ಗಣನೆಗೆ ಬರುತ್ತದೆ. ಇಡೀ ವಿಶ್ವ ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತಿದೆ. ನಾವು ಜ.11 ರಿಂದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಎಲ್ಲ ಮೂಲೆ, ಮೂಲೆಗಳನ್ನು ತಲುಪಿ ಎಲ್ಲ ವರ್ಗದ ಜನರನ್ನು ಭೇಟಿ ಮಾಡಲಾಗುವುದು. ಬಿಜೆಪಿ ಸರ್ಕಾರ ತನ್ನ ಕೊನೆಯ ದಿನಗಳಲ್ಲಿದ್ದು, ಈ ಸರ್ಕಾರ ಮಾಡಿರುವ ಅನ್ಯಾಯವನ್ನು ಜನರಿಗೆ ತಿಳಿಸುತ್ತೇವೆ. ಬಿಜೆಪಿ ಸರ್ಕಾರದ ಅಂತ್ಯವಾಗಿ ಕಾಂಗ್ರೆಸ್ ಸರ್ಕಾರ ಬರಲಿದೆ’ ಎಂದು ತಿಳಿಸಿದ್ದಾರೆ.
ಲಿಂಬಾವಳಿ ಅವರ ಹೆಸರು ಬರೆದಿಟ್ಟು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ‘ಯಾರಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಕಾರಣವಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಈ ದೇಶದಲ್ಲಿ ಕಾನೂನು ಇದೆ. ಈ ಪ್ರಕರಣದಲ್ಲಿ ಶಾಸಕರ ಹೆಸರು ಪ್ರಸ್ತಾಪವಾಗಿದ್ದು, ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು. ತನಿಖೆ ಆಗಲಿ, ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸಲಿ, ನಾವು ಈ ವಿಚಾರದಲ್ಲಿ ಅನಗತ್ಯವಾಗಿ, ಯಾರ ಹೆಸರನ್ನೂ ಹೇಳುವುದಿಲ್ಲ. ಜನಸಾಮಾನ್ಯರು ಈ ಪ್ರಕರಣವನ್ನು ನೋಡುತ್ತಿದ್ದು, ಸರ್ಕಾರ ಧೃಡ ಕ್ರಮ ಕೈಗೊಳ್ಳಬೇಕು. ಶಾಸಕರ ದುರ್ವರ್ತನೆಗಳಿಂದ ಅನೇಕ ಸಾವುಗಳು ಸಂಭವಿಸುತ್ತಿವೆ. ಇದಕ್ಕೆ ಕೊನೆ ಹಾಡಬೇಕು. ತಪ್ಪಿತಸ್ಥರು ಶಿಕ್ಷೆಗೆ ಒಳಗಾಗಬೇಕು. ಕಾನೂನಿನ ಮುಂದೆ ಲಿಂಬಾವಳಿ ಬೇರೆಯಲ್ಲ, ಶಿವಕುಮಾರ್ ಬೇರೆಯಲ್ಲ. ಆದರೆ ಈ ಸರ್ಕಾರ ಲಂಚ, ಮಂಚ, ಇಂತಹ ಕೊಲೆ ಪ್ರಕರಣಗಳಲ್ಲಿ ಆರೋಪಿಗಳ ರಕ್ಷಣೆ ಮಾಡಿಕೊಂಡು ಬಂದಿದೆ. ಜನ ಇನ್ನು 60 ದಿನ ಈ ಸರ್ಕಾರದ ಅನ್ಯಾಯವನ್ನು ತಡೆದುಕೊಳ್ಳಬೇಕಿದೆ’ ಎಂದರು.
ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಲಿಂಬಾವಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಮೃತ ವ್ಯಕ್ತಿ ಅವರ ಕಡೆ ಹುಡುಗ. ಆತನ ಮರಣಪತ್ರವನ್ನು ನಾವು ಬರೆದಿದ್ದೆವಾ ಅಥವಾ ಬರೆಸಿದ್ದೆವಾ? ನಾವು ಷಡ್ಯಂತ್ರದಲ್ಲಿ ಭಾಗಿಯಾಗಿದ್ದರೆ ಯಾರು ಭಾಗಿಯಾಗಿದ್ದಾರೆ ಎಂದು ಹೇಳಲಿ. ಆತ್ಮಹತ್ಯೆ ಪತ್ರ ಬರೆದಿರುವುದರಿಂದ ಎಲ್ಲರೂ ತನಿಖೆಗೆ ಒಳಗಾಗಿ ಶಿಕ್ಷೆಗೆ ಒಳಗಾಗಬೇಕು’ ಎಂದಿದ್ದಾರೆ.