ಡೆಹ್ರಾಡೂನ್ (ಉತ್ತರಾಖಂಡ), ಜ 04 (DaijiworldNews/DB): ಅಪಘಾತದಿಂದ ಗಾಯಗೊಂಡ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ.
ರಿಷಬ್ ಹೆತ್ತವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮುಂಬೈಗೆ ಸ್ಥಳಾಂತರಿಸಿ ಅವರಿಗೆ ಚಿಕಿತ್ಸೆ ನೀಡುವ ಸಂಬಂಧ ಅವರ ಹೆತ್ತವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.
ಇದೀಗ ಅವರನ್ನು ಡೆಹ್ರಾಡೂನ್ ಆಸ್ಪತ್ರೆಯಿಂದ ಮುಂಬೈಗೆ ಏರ್ಲಿಫ್ಟ್ ಮಾಡಲಾಗಿದ್ದು, ಅಲ್ಲಿ ಇನ್ನೂ ಹೆಚ್ಚಿನ ಚಿಕಿತ್ಸೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರಾಖಂಡದಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದ ವೇಳೆ ಪಂತ್ ಚಾಲನೆ ಮಾಡುತ್ತಿದ್ದ ಕಾರು ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ್ ಝಾಲ್ ಬಳಿ ಡಿವೈಡರ್ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಆದರೆ ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು.