ಸಂಕೇಶ್ವರ, ಜ 05 (DaijiworldNews/DB): ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಸಮೀದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕೊಲ್ಲಾಪೂರ ಕಡೆಯಿಂದ ಬೆಳಗಾವಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹಂಚಿನಾಳ ಕ್ರಾಸ್ ಬಳಿ ಇರುವ ಗುಲಾಬಶಾವಲಿ ದರ್ಗಾ ಬಳಿಯ ಪೂನಾ ಬೆಂಗಳೂರು ರಾಷ್ಟ್ರೀಯ 4ರಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆ ಬಸ್ಗೆ ಬೆಂಕಿ ಹತ್ತಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಬಸ್ ಚಾಲಕ ಮತ್ತು ನಿರ್ವಾಹಕ ಕೂಡಲೇ ಬಸ್ ನಿಲ್ಲಿಸಿದ್ದು, ಪ್ರಯಾಣಿಕರು ಬಸ್ನಿಂದ ಕೆಳಗೆ ಇಳಿದಿದ್ದಾರೆ. ಇದರಿಂದ ಸಂಭಾವ್ಯ ಜೀವಹಾನಿ ತಪ್ಪಿದಂತಾಗಿದೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದ ತತ್ಕ್ಷಣ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಯಮಕನಮರಡಿ ಸಿಪಿಐ ರಮೇಶ ಛಾಯಾಗೋಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದು ಬಂದಿಲ್ಲ.