ಕೋಲ್ಕತ್ತಾ, ಜ 10 ( DaijiworldNews/MS): ಹಾವು ಬಿದ್ದಿದೆ ಎನ್ನಲಾದ ಬಿಸಿಯೂಟ ಸೇವಿಸಿದ ಹಲವಾರು ಶಾಲಾ ಮಕ್ಕಳನ್ನು ಅಸ್ವಸ್ಥರಾಗಿರುವ ಘಟನೆ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ವರದಿಯಾಗಿದೆ.
ಜಿಲ್ಲೆಯ ಮಯೂರೇಶ್ವರ ಬ್ಲಾಕ್ನ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಘಟನೆ ನಡೆದಿದ್ದು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ಮಕ್ಕಳು ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ.
ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ತಕ್ಷಣವೇ ರಾಂಪುರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದೆವು ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ.ಈ ಬಗ್ಗೆ ಜಿಲ್ಲಾ ಪ್ರಾಥಮಿಕ ಶಾಲಾ ನಿರೀಕ್ಷಕರಿಗೆ ಮಾಹಿತಿ ನೀಡಲಾಗಿದೆ. ಅವರು ಇಂದು (ಜನವರಿ 10ರಂದು) ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ಕ್ಷೇತ್ರ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಹೇಳಿದ್ದಾರೆ.
ಸದ್ಯ ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದವರೆಲ್ಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಲ್ಲೇ ಇರುವ ವಿದ್ಯಾರ್ಥಿಗೂ ಯಾವುದೇ ಅಪಾಯವಿಲ್ಲ ಎಂದು ದೀಪಾಂಜನ್ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಪೋಷಕರು ಶಾಲೆಯ ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.